ಶಿಕ್ಷಣವೇ ದೇಶದ ಅಭಿವೃದ್ಧಿಯ ಬುನಾದಿ ಎಂದು ಸಚಿವ ಪ್ರಭು ಚವ್ಹಾಣ ಹೇಳಿದರು
ಶಿಕ್ಷಣ ದೇಶದ ಅಭಿವೃದ್ಧಿಯನ್ನು ನಿರ್ಧರಿಸುವ ಪ್ರಮುಖ ಅಂಶವಾಗಿದ್ದು, ಆದ್ದರಿಂದ ನನ್ನ
ಕ್ಷೇತ್ರದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಔರಾದ(ಬಿ) ಕ್ಷೇತ್ರದ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಸಹಭಾಗಿತ್ವದಲ್ಲಿ ಠಾಣಾಕುಶನೂರ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.
ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ರೀತಿಯಲ್ಲಿಯೇ ಅಭಿವೃದ್ಧಿಪಡಿಸಲಾಗಿತ್ತಿದೆ.
ಶಾಲೆಗಳಲ್ಲಿ ಕುಡಿಯುವ ನೀರು, ಆಟದ ಮೈದಾನ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.
ಶಾಲೆಯ ಅಭಿವೃದ್ಧಿಗಾಗಿ ಯಾವುದೇ ರೀತಿಯ ಬೇಡಿಕೆಗಳಿದ್ದರೂ ತಮ್ಮನ್ನು ನೇರವಾಗಿ ಭೇಟಿಯಾಗಿ ಮನವಿ ಸಲ್ಲಿಸಬಹುದು.
ಆದ್ಯತೆಯ ಮೇರೆಗೆ ಬೇಡಿಕೆ ಈಡೇರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವಶ್ಯಕತೆಯಿರುವ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ ಎಂದರು.
ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳು ಮಕ್ಕಳನ್ನು ಕ್ರಿಯಾಶೀಲಗೊಳಿಸಲು ಸಹಕಾರಿಯಾಗಿವೆ.
ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಚನ್ನಾಗಿ ಅಭ್ಯಾಸ ಮಾಡಬೇಕು. ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಸಚಿವ ಪ್ರಭು ಚೌವ್ಹಾಣ್ ಸಲಹೆ ನೀಡಿದರು.
ಫಲಿತಾಂಶ ಸುಧಾರಣೆಗಾಗಿ ಹೆಚ್ಚು ಅಂಕಗಳಿಂದ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಬಹುಮಾನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮದಂತಹ ನಾನಾ ರೀತಿಯಿಂದ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಂದ ಉತ್ತೀರ್ಣರಾಗಲು ಯತ್ನಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಹೆಚ್ಚು ಅಂಕಗಳಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಮದನೂರ ಶಾಲೆಯ ಚನ್ನಬಸವ ಸಂತೋಷಕುಮಾರ, ಕೌಡಗಾಂವ ಶಾಲೆಯ ಪ್ರೀಯಾ ಸಂಜುಕುಮಾರ, ದೇಶಮುಖ ವಡಗಾಂವ ಶಾಲೆಯ ಕೃಷ್ಣ ತುಕಾರಾಮ ಅವರಿಗೆ ಲ್ಯಾಪ್ಟಾಪ್ ವಿತರಿಸಿ, ಅವರ ಪೋಷಕರು ಮತ್ತು ಶಾಲೆಯ ಮುಖ್ಯ ಗುರುಗಳಿಗೆ ಸನ್ಮಾನಿಸಲಾಯಿತು.
https://play.google.com/store/apps/details?id=com.speed.newskannada