ಮುರುಘಾ ಮಠದ ಹಾಸ್ಟೆಲ್ನಲ್ಲಿರುವ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪೀಠಾಧ್ಯಕ್ಷ ಮುರುಘಾ ಶರಣರ (Murugha Seer) ವಿರುದ್ಧ ಪಿತೂರಿ ಪ್ರಕರಣದಲ್ಲಿ ಬಂಧಿತರಾಗಿದ್ದ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮಂಗಳವಾರ (ಡಿ. ೨೭) ಬಿಡುಗಡೆಯಾಗಿದ್ದು, ಕಾರಾಗೃಹದ ಬಳಿ ಜಮಾಯಿಸಿದ ಬೆಂಬಲಿಗರಿಂದ ಅದ್ಧೂರಿ ಸ್ವಾಗತ ದೊರೆತಿದೆ. ಹಾರ ಹಾಕಿ ಬಸವರಾಜನ್ ಅವರು ಬೆಂಬಲಿಗರು ಸ್ವಾಗತಿಸಿದರು. ಅಲ್ಲದೆ, ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು.ಮುರುಘಾ ಶರಣರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುವಂತೆ ಹಾಸ್ಟೆಲ್ನಲ್ಲಿ ಓದುತ್ತಿದ್ದ ಬಾಲಕಿಯರ ಮೇಲೆ ಒತ್ತಡ ತರುವ ಮೂಲಕ ಬಂಧನಕ್ಕೆ ಪಿತೂರಿ ಮಾಡಿದ್ದರು ಎಂಬ ಆರೋಪದ ಮೇಲೆ ಬಸವರಾಜನ್ ಅವರ ಮೇಲೆ ನವೆಂಬರ್ 9ರಂದು ಪಿತೂರಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 10ರಂದು ಬಸವರಾಜನ್ ಬಂಧನವಾಗಿತ್ತು.ಬಳಿಕ ಬಸವರಾಜನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಬಸವರಾಜನ್ ಅವರು ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.22ರಂದು ಹೈಕೋರ್ಟ್ ಜಾಮೀನು ನೀಡಿತ್ತು. ಈಗ ಹೈಕೋರ್ಟ್ನಿಂದ ಆದೇಶ ಪ್ರತಿ ತಂದ ಬಳಿಕ ಬಿಡುಗಡೆ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada