ಬೆಂಗಳೂರು,ಏ.6- ಒಂದು ಕಡೆ ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಲು ಮುಂದಾಗಿದೆ. ಜನರಿಗೆ ಹೆಚ್ಚಿನ ಹೊರೆಯಾಗದಂತೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 1 ರೂ.
ಹೆಚ್ಚಳ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಪ್ರತಿ ಲೀಟರ್ಗೆ 5 ರೂ. ದರ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿವೆ. ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಂಎಫ್ ಮಂಡಳಿಯ ಸಭೆ ಕರೆದು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
14 ಹಾಲು ಒಕ್ಕೂಟಗಳು ಇದೇ 10ರೊಳಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ನಿರ್ಧರಿಸಿವೆ. ಈ ಕುರಿತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸತೀಶ್ ಜೊತೆ ಚರ್ಚೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ಬೊಮ್ಮಾಯಿ ಅವರ ಜೊತೆಯೂ ಚರ್ಚೆ ನಡೆಸಿ ಹಾಲಿನ ದರ ಹೆಚ್ಚಳದ ಬೇಡಿಕೆ ಇಡಲಾಗುವುದು ಎಂದು ತಿಳಿಸಿವೆ.
ಹಾಲಿನ ದರ ಹೆಚ್ಚಳ ಮಾಡಬೇಕೆಂದು 14 ಒಕ್ಕೂಟಗಳು ಸರ್ಕಾರದ ಮುಂದೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಸರ್ಕಾರ ಬೇರೆ ಬೇರೆ ಕಾರಣಗಳಿಂದ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಕೊರೊನಾ ಕಾರಣದಿಂದಾಗಿ ಮುಂದೂಡುತ್ತಾ ಬಂದಿತ್ತು. ಸದ್ಯ ಅಡುಗೆ ಎಣ್ಣೆ ಸಹಿತ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತಿದೆ. ಕಳೆದ ಎರಡು ವಾರಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರವೂ ಹೆಚ್ಚಳವಾಗಿದೆ. ಈ ಮಧ್ಯೆ ಹಾಲಿನ ದರ ಹೆಚ್ಚಿಸುವಂತೆ ಒಕ್ಕೂಟಗಳು ಕೆಎಂಎಫ್ ಮೇಲೆ ನಿರಂತರ ಒತ್ತಡ ಹಾಕುತ್ತಿವೆ.
ಈ ಎಲ್ಲಾ ಕಾರಣಗಳಿಂದ ಮುಂಬರುವ ಕೆಎಂಎಫ್ ಸಾಮಾನ್ಯ ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಪ್ರತಿ ಲೀಟರ್ಗೆ 5 ರೂ. ಹೆಚ್ಚಳ ಮಾಡುವಂತೆ ಜಿಲ್ಲಾ ಒಕ್ಕೂಟಗಳು ಕೇಳಿಕೊಂಡಿವೆ. ಅದೇ ರೀತಿ 3 ರೂ. ಹೆಚ್ಚಳ ಮಾಡಿದರೆ ಪ್ರತಿ ಲೀಟರ್ ಹಾಲಿಗೆ 42 ರೂ. ಆಗುತ್ತದೆ. ಹೀಗೆ ಹೆಚ್ಚುವರಿ ಮೊತ್ತವನ್ನು ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು.
ಬಳಿಕ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದೆಯೂ ಮಂಡಿಸಲಾಗಿತ್ತು. ಆದರೆ, ಕೋವಿಡ್ ಮೂರನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡಿದರೆ ಜನಸಾಮಾನ್ಯರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಕೆಲ ಕಾಲ ಈ ಪ್ರಸ್ತಾವನೆಯನ್ನು ಮುಂದೂಡಿ ಎಂದು ಸಲಹೆ ನೀಡಿದ್ದರಂತೆ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದು, ಇನ್ನು ತಡಮಾಡದೆ ಬೆಲೆ ಏರಿಕೆ ಮಾಡಿ ಕೈತೊಳೆದುಕೊಳ್ಳಬೇಕು ಎಂಬ ಹವಣಿಕೆಯಲ್ಲಿ ಎಲ್ಲರೂ ಇದ್ದಾರೆ. ದರ ಏರಿಕೆ ನಿಶ್ಚಿತ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.
ಹಾಲಿನ ದರ 3 ವರ್ಷಗಳಿಂದ ಹೆಚ್ಚಾಗಿಲ್ಲ. ಹೀಗಾದರೆ ಒಕ್ಕೂಟಗಳು ತೀವ್ರ ನಷ್ಟಕ್ಕೆ ಒಳಲಾಗುತ್ತವೆ. ಎಲ್ಲಾ ದರಗಳೂ ಏರುತ್ತಿರುವಾಗ ರೈತನಿಗೆ ನ್ಯಾಯಯುತವಾದ ಬೆಲೆ ನೀಡಬೇಕಾದರೆ ದರ ಹೆಚ್ಚಳ ಮಾಡಬೇಕಾಗಿರುವುದು ಅನಿವಾರ್ಯ. ಸರ್ಕಾರಕ್ಕೆ ಮತ್ತು ಕೆಎಂಎಫ್ಗೆ ಈಗಾಗಲೇ ದರ ಹೆಚ್ಚಳ ಮಾಡುವಂತೆ ಮೂರು ಬಾರಿ ಮನವಿ ಸಲ್ಲಿಸಿದ್ದೇವೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಶೀಘ್ರದಲ್ಲಿಯೇ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ದರ ಪರಿಷ್ಕರಣೆಗೆ ಮತ್ತೊಮ್ಮೆ ಮನವಿ ಮಾಡುತ್ತೇವೆ ಎಂದು ಕೆಎಂಎಫ್ನ ಹಿರಿಯ ಪದಾಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಪ್ರತಿ ಲೀಟರ್ ಹಾಲು ಖರೀದಿಗೆ ರೈತರಿಗೆ 24.5 ರೂ.ನಿಂದ 26ರೂ.ವರೆಗೆ (ಹಾಲಿನ ಕೊಬ್ಬಿನಾಂಶದ ಆಧಾರದ ಮೇಲೆ ದರ ವ್ಯತ್ಯಾಸ) ಕೊಡಲಾಗುತ್ತಿದೆ. ಏ.1ರಿಂದ ರೈತರಿಗೆ ನೀಡುತ್ತಿರುವ ದರದಲ್ಲಿ ಹೆಚ್ಚಳ ಮಾಡಲು ನಿರ್ಧರಿಲಾಗಿದೆ.
ಅದರೆ ಎಷ್ಟು ಹೆಚ್ಚಳ ಮಾಡಬೇಕು ಎಂಬುದನ್ನು ಸಭೆ ನಡೆಸಿ ತೀರ್ಮಾನಿಸಲಾಗುವುದು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂಪಾಯಿಯಾದರೂ ಗ್ರಾಹಕರಿಗೆ ಹೆಚ್ಚಳ ಮಾಡಿದರೆ ಮಾತ್ರ ಒಕ್ಕೂಟಗಳು ಉಳಿಯುತ್ತದೆ ಎಂಬುದು ಕೆಎಂಎಫ್ನ ವಾದವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada