ಫೆಬ್ರುವರಿ 28 ಭಾರತೀಯ ವಿಜ್ಞಾನಕ್ಕೊಂದು ಪರ್ವ ದಿನ. 1928ರ ಇದೇ ದಿನದಂದು ಮಹಾನ್ ವಿಜ್ಞಾನಿ ಸರ್ ಸಿ ವಿ ರಾಮನ್ ಅವರು ವಿಶ್ವಪ್ರಸಿದ್ಧವಾದ ‘ರಾಮನ್ ಎಫೆಕ್ಟ್’ ಸಂಶೋಧನೆಯ ವಿವರಗಳನ್ನು ಜಗತ್ತಿಗೆ ಬಹಿರಂಗಪಡಿಸಿದರು.
ಮೆಡಿಟರೇನಿಯನ್ ಸಮುದ್ರದಲ್ಲಿ ಪಯಣಿಸುತ್ತಿದ್ದ ಸಿ ವಿ ರಾಮನ್ ಅವರು ಕಡಲಿನ ನೀಲಿ ಬಣ್ಣವನ್ನು ಕಂಡು ಆ ಸೊಬಗಿಗೆ ಪರವಶರಾದದ್ದು ಮಾತ್ರವಲ್ಲ, ಅವರಿಗೆ ನೀರಿನ ಬಣ್ಣ ಅದು ಹೇಗೆ ನೀಲಿಯಾಗಿದೆ ಎಂಬ ಸೋಜಿಗ ಕೂಡಾ ಉಂಟಾಯಿತು. ಆಕಾಶವೂ ನೀಲಿ, ಸಮುದ್ರವೂ ನೀಲಿ. ಹಾಗಾದರೆ ಆಕಾಶದ ಪ್ರತಿಫಲನ ನೀರಿನ ಮೇಲೆ ಕಾಣುತ್ತಿದೆಯೇ ಇಲ್ಲ ಇದಕ್ಕೆ ಇನ್ನೇನಾದರೂ ಕಾರಣ ಇರಬಹುದೇ ಎಂದು ತೀವ್ರವಾಗಿ ಚಿಂತಿಸಿದ ಅವರಿಗೆ “ಸೂರ್ಯನ ಬೆಳಕು ನೀರಿನ ಕಣ ಕಣದಲ್ಲೂ ಹರಡಿಕೊಳ್ಳುವುದೇ ಸಮುದ್ರವು ನೀಲಿಯಾಗಿ ಕಾಣುವುದಕ್ಕೆ ಕಾರಣ” ಎಂದು ದೃಢಪಟ್ಟಿತು. ಆ ಕ್ಷಣದಿಂದಲೇ ತಮ್ಮ ತೀವ್ರವಾದ ಸಂಶೋಧನೆಗಳನ್ನು ನಡೆಸಿದ ರಾಮನ್ ದ್ರವಗಳಲ್ಲಿ ಬೆಳಕಿನ ಸಂಚಲನೆಯ ಕುರಿತಾದ ಸುದೀರ್ಘ ಅಧ್ಯಯನವನ್ನು ಕೈಗೊಂಡು ಆ ಪ್ರಯೋಗಗಳ ಪರಿಣಾಮವನ್ನು ವೈಜ್ಞಾನಿಕ ಲೋಕದೆದುರು ತೆರೆದಿಟ್ಟರು. ಈ ಸಂಶೋಧನೆಗಾಗಿ ರಾಮನ್ ಅವರಿಗೆ ನೋಬಲ್ ಪಾರಿತೋಷಕ ಸಂದಿತು ಎಂಬುದು ನಮಗೆಲ್ಲಾ ತಿಳಿದಿರುವ ವಿಚಾರ. ರಾಮನ್ ಅವರ ಈ ಸಂಶೋಧನೆಯ ಗೌರವಾರ್ಥವಾಗಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.
ಇಂದು ಬಾಹ್ಯಾಕಾಶ, ಪರಮಾಣು ವಿಜ್ಞಾನ, ಮಾಹಿತಿ ವಿಜ್ಞಾನ, ಜೈವಿಕ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರಗಳಲ್ಲೂ ಸೇರಿದಂತೆ ದೇಶದ ವಿಜ್ಞಾನಿಗಳು ಕೊಟ್ಟಿರುವ ಕೊಡುಗೆ ಮಹತ್ವದ್ದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಎಲ್ಲವನ್ನೂ ಹಾಲು ಕರೆಯುವ ಹಸು ಎಂದು ಕಾಣುವಂತಹ ಇಂದಿನ ವ್ಯಾಪಾರೀ ಮನೋಧರ್ಮದಲ್ಲಿ ಹೊಸ ಪೀಳಿಗೆಯ ತಲೆಮಾರುಗಳು ಸಂಶೋಧನಾ ಕ್ಷೇತ್ರಗಳತ್ತ ಮೊಗ ಮಾಡುತ್ತಿರುವುದು ಕಡಿಮೆಯಾಗುತ್ತಿದೆ ಎಂಬುದು ಸುಳ್ಳಲ್ಲ. ಹಾಗೆ ಆಸಕ್ತರಿದ್ದರೂ ಅವರು ಅನಿವಾರ್ಯವೆಂಬಂತೆ ಅಮೆರಿಕಕ್ಕೆ ಜಾರುತ್ತಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: