ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಶೆಲ್ಲಿಂಗ್ ಗೆ ಬಲಿಯಾಗಿರುವ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಅಲ್ಲಿ ದಾಳಿ ನಡೆಯುತ್ತಿರುವುದರಿಂದ ತರುವುದಕ್ಕೆ ಅಡ್ಡಿಯಾಗುತ್ತಿದೆ.ಅಲ್ಲಿ ಯುದ್ಧ ನಿಂತ ತಕ್ಷಣ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಬಂಧಪಟ್ಟ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ. ಮೃತದೇಹವನ್ನು ತರಲು ನಮ್ಮ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನ ಮಾಡುತ್ತಿದೆ. ಈಗ ನವೀನ್ ಮೃತದೇಹ ಶವಾಗಾರದಲ್ಲಿ ಕೆಡದಂತೆ ಇಡಲಾಗಿದೆ ಎಂದು ತಿಳಿಸಿದರು.ಉಕ್ರೇನ್ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 25 ಲಕ್ಷ ರೂಪಾಯಿ ಪರಿಹಾರ ಚೆಕ್ ನೀಡಿದ್ದರು. ಮತ್ತು ಕುಟುಂಬದ ಸದಸ್ಯರಿಗೆ ಉದ್ಯೋಗದ ಭರವಸೆ ನೀಡಿದ್ದರು.ಮೃತ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಕರ್ನಾಟಕದ ಹಾವೇರಿ ಜಿಲ್ಲೆಯ ನಿವಾಸಿ. ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ 21 ವರ್ಷದ ವಿದ್ಯಾರ್ಥಿ ನವೀನ್ ಬಂಕರ್ ನಿಂದ ಆಹಾರ ಖರೀದಿಸಲೆಂದು ಸರತಿ ಸಾಲಿನಲ್ಲಿ ನಿಂತಿದ್ದಾಗ ರಷ್ಯಾದ ಶೆಲ್ ದಾಳಿಗೆ ಬಲಿಯಾಗಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada