ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ದೇಶಭಕ್ತಿ ಪ್ರಜ್ವಲಿಸುವಂತೆ ಮಾಡುವ ಮತ್ತು ಮೈನವಿರೇಳಿಸುವ ಪ್ರಮುಖ ಚರಿತ್ರೆ ಚಂದ್ರಶೇಖರ ಅಜಾದ್ ಅವರದ್ದು. ಬಾಬು ಕೃಷ್ಣಮೂರ್ತಿ ಅವರ ‘ಅಜೇಯ’ ಪುಸ್ತಕ ಕನ್ನಡ ನಾಡಿನಲ್ಲಿ ಹಲವಾರು ದಶಕಗಳಿಂದ ಪ್ರಭಾವ ಮೂಡಿಸಿದ್ದು, ನೀವು ಅದನ್ನು ಓದಿದ್ದಲ್ಲಿ ಅದರ ಪ್ರಭಾವ ನಿಮಗರಿಯದಂತೆ ನಿಮ್ಮೊಳಗೆ ಅಂತರ್ಗತವಾಗಿಬಿಟ್ಟಿರುತ್ತದೆ. ಫೆಬ್ರವರಿ 27, ಈ ಮಹಾನ್ ದೇಶಭಕ್ತ ತಮ್ಮ ಪ್ರಾಣವನ್ನು ಸಮರ್ಪಿಸಿದ ದಿನ.
ಚಂದ್ರಶೇಖರ “ಆಜಾದ್” ಎಂದೇ ಹೆಚ್ಚು ಗುರುತಿಸಲ್ಪಡುವ ಚಂದ್ರಶೇಖರ ಸೀತಾರಾಮ್ ತಿವಾರಿಯವರು 1906ರ ಜುಲೈ 23ರಂದು
ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿರುವ ಭಾವ್ರಾ ಎಂಬ ಹಳ್ಳಿಯಲ್ಲಿ ಜನಿಸಿದರು. ಭಾರತದ ಬಹು ಪ್ರಮುಖ ಕ್ರಾಂತಿಕಾರಿಗಳಲ್ಲಿ ಒಬ್ಬರಾದ ಅವರನ್ನು ಭಗತ್ ಸಿಂಗ್ರ ಮಾರ್ಗದರ್ಶಕ, ಗುರು ಎಂದು ಪರಿಗಣಿಸಲಾಗಿದೆ.
ಶ್ರದ್ಧಾವಂತರಾಗಿದ್ದ ಆಜಾದ್ ಇತರರ ಒಳಿತಿಗಾಗಿ ಹೋರಾಡುವುದು ತಮ್ಮ ಧರ್ಮ ಎಂದು ನಂಬಿದ್ದರು. ಓರ್ವ ಯೋಧ ಎಂದಿಗೂ ಶಸ್ತ್ರವನ್ನು ತ್ಯಜಿಸಲಾರನೆಂಬುದು ಅವರ ಅಭಿಪ್ರಾಯವಾಗಿತ್ತು. 1919ರಲ್ಲಿ ಅಮೃತಸರದಲ್ಲಿ ನಡೆದ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಘಟನೆಯಿಂದ ಚಂದ್ರಶೇಖರ ಆಜಾದ್ರವರು ಮಾನಸಿಕವಾಗಿ ತೀವ್ರವಾಗಿ ಜರ್ಜರಿತರಾಗಿದ್ದರು. ಮಹಾತ್ಮಾ ಗಾಂಧಿಯವರು 1921ರಲ್ಲಿ ಅಸಹಕಾರ ಚಳುವಳಿಯನ್ನು ಹಮ್ಮಿಕೊಂಡಾಗ, ನಡೆದ ಪ್ರತಿಭಟನೆಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದರು. ಈ ನಾಗರಿಕ ಶಾಸನಭಂಗಕ್ಕಾಗಿ ಅವರು ಬಂಧಿತರಾದುದಲ್ಲದೇ, ತಮ್ಮ ಹದಿನೈದನೇ ವಯಸ್ಸಿನಲ್ಲಿಯೇ ಶಿಕ್ಷೆಗೆ ಗುರಿಯಾದರು. ಮ್ಯಾಜಿಸ್ಟ್ರೇಟರು ಅವರ ಹೆಸರೇನೆಂದು ಕೇಳಿದಾಗ, ಅವರು ‘ಆಜಾದ್’ ಎಂದು ಹೇಳಿದರು. ಆಜಾದ್ ಎಂದರೆ ‘ಸ್ವತಂತ್ರ ವ್ಯಕ್ತಿ’ ಎಂದು ಅರ್ಥ. ಈ ಉದ್ಧಟತನಕ್ಕಾಗಿ ಅವರಿಗೆ ಹದಿನೈದು ಛಡಿಏಟುಗಳ ಶಿಕ್ಷೆಯನ್ನು ನೀಡಲಾಯಿತು. ಛಾಟಿಯಿಂದ ಹೊಡೆದ ಪ್ರತಿ ಏಟಿಗೂ ಯುವ ಚಂದ್ರಶೇಖರ “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಮಾಡುತ್ತಿದ್ದರು. ಈ ಘಟನೆಯ ನಂತರ, ಚಂದ್ರಶೇಖರರಿಗೆ ಆಜಾದ್ ಎಂಬ ಬಿರುದು ಪ್ರಾಪ್ತವಾಯಿತಲ್ಲದೇ ಅವರು ಚಂದ್ರಶೇಖರ ಆಜಾದ್ ಎಂದೇ ಗುರುತಿಸಲ್ಪಡುತ್ತಿದ್ದರು.
ಅಸಹಕಾರ ಚಳುವಳಿ ಸ್ಥಗಿತಗೊಂಡ ನಂತರ, ಇನ್ನೂ ಹೆಚ್ಚಿನ ಆಕ್ರಮಣಶಾಲಿ ಹಾಗೂ ಉಗ್ರ ಕ್ರಾಂತಿಕಾರಿ ಆದರ್ಶಗಳಿಂದ ಆಕರ್ಷಿತರಾದ ಅಜಾದರು, ಯಾವುದೇ ಮಾರ್ಗದಿಂದಾದರೂ ಸಂಪೂರ್ಣ ಸ್ವಾತಂತ್ರ್ಯ ಪಡೆಯುವ ಧ್ಯೇಯಕ್ಕೆ ತಮ್ಮನ್ನು ಮುಡಿಪಾಗಿಡಲು ನಿರ್ಧರಿಸಿದರು. ಈ ನಿಟ್ಟಿನೆಡೆಗೆ ಮುಂದುವರೆಯುವ ಪ್ರಥಮ ಹೆಜ್ಜೆಯಾಗಿ ಅವರು ‘ಹಿಂದೂಸ್ತಾನ್ ಸೋಷಲಿಸ್ಟ್ ರಿಪಬ್ಲಿಕನ್ ಅಸೋಸಿಯೇಷನ್-HSRA’ ಎಂಬ ಸಂಘಟನೆಯನ್ನು ಆರಂಭಿಸಿದರಲ್ಲದೇ ಭಗತ್ ಸಿಂಗ್, ಸುಖದೇವ್, ಬಟುಕೇಶ್ವರ ದತ್ತ ಮತ್ತು ರಾಜಗುರುರಂತಹಾ ಕ್ರಾಂತಿಕಾರಿಗಳಿಗೆ ಮಾರ್ಗದರ್ಶಕರಾದರು. ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯ ದೊರಕಿಸಿಕೊಳ್ಳುವುದೇ HSRA ಸಂಘಟನೆಯ ಗುರಿಯಾಗಿತ್ತು. ಅಲ್ಲದೆ, ಸಮಾಜವಾದಿತತ್ವದ ಮೇಲೆ ಆಧಾರಿತವಾದ ನವೀನ ಭಾರತವನ್ನು ಕಟ್ಟುವ ಮಹದುದ್ದೇಶವನ್ನು ಹೊಂದಿತ್ತು. ಆಜಾದರು ಮತ್ತು ಅವರ ದೇಶಬಾಂಧವರು ಬ್ರಿಟಿಷರ ವಿರುದ್ಧ ಅನೇಕ ಕ್ರಾಂತಿಕಾರೀ ಪ್ರತಿಭಟನೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದರು. ಕಾಕೊರಿ ರೈಲು ದರೋಡೆ (1925), ವೈಸರಾಯ್ರ ರೈಲನ್ನು ಸ್ಫೋಟಿಸಲು ನಡೆಸಿದ ವಿಫಲ ಯತ್ನ (1926), ಮತ್ತು ಲಾಲಾ ಲಜಪತ ರಾಯ್ರನ್ನು ಕೊಂದುದರ ಪ್ರತೀಕಾರವಾಗಿ ಲಾಹೋರ್ನಲ್ಲಿ (1928) ಜಾನ್ ಪಾಯಂಟ್ಜ್ ಸಾಂಡರ್ಸ್ನನ್ನು ಗುಂಡು ಹಾರಿಸಿ ಕೊಂದಂತಹಾ ಅನೇಕ ಚಟುವಟಿಕೆಗಳಲ್ಲಿ ಆಜಾದರು ಪ್ರಮುಖ ಪಾತ್ರಧಾರಿಯಾಗಿದ್ದರು.
1931ರ ಫೆಬ್ರವರಿ 27ರಂದು, ಚಂದ್ರಶೇಖರ ಆಜಾದರು ಅಲಹಾಬಾದ್ನ ಆಲ್ಫ್ರೆಡ್ ಉದ್ಯಾನವನದಲ್ಲಿ ತಮ್ಮ ಇಬ್ಬರು ಸಂಗಡಿಗರನ್ನು ಭೇಟಿ ಮಾಡಲು ಬಂದಾಗ ಅವರನ್ನು ಪೊಲೀಸರು ಗುರುತು ಹಿಡಿದರು, ಇಡೀ ಉದ್ಯಾನವನ್ನು ಸುತ್ತುವರಿದ ಪೊಲೀಸರು ಚಂದ್ರಶೇಖರ ಆಜಾದ್ರಿಗೆ ಶರಣಾಗಲು ಆದೇಶಿಸಿದರು. ಆಜಾದರು ಏಕಾಕಿಯಾಗಿ ಹೋರಾಡಿದರಲ್ಲದೇ ಮೂವರು ಪೊಲೀಸರನ್ನು ಕೊಂದರಾದರೂ ಅವರ ತೊಡೆಗೆ ಗುಂಡೇಟು ಬಿದ್ದಿತ್ತು. ತಮ್ಮಲ್ಲಿದ್ದ ಬಹುತೇಕ ಮದ್ದುಗುಂಡುಗಳೆಲ್ಲಾ ಖಾಲಿಯಾದ ನಂತರ, ತಪ್ಪಿಸಿಕೊಳ್ಳಲು ಬೇರೆ ದಾರಿಯಿಲ್ಲವೆಂದು ಮನಗಂಡ ಅವರು ತಮ್ಮಲ್ಲಿ ಉಳಿದಿದ್ದ ಕೊನೆಯ ಗುಂಡಿನಿಂದ ತಲೆಗೆ ಗುಂಡು ಹೊಡೆದುಕೊಂಡರು. ಅಷ್ಟೊಂದು ಪೊಲೀಸರ ಮಧ್ಯೆ ಅಭಿಮನ್ಯುವಿನಂತೆ ಹೋರಾಡಿದ ಆಜಾದ್ ಅವರಿಗೆ ಎಷ್ಟೊಂದು ಸುವ್ಯವಸ್ಥಿತ ಜಾಗೃತಿ ಇತ್ತೆಂದರೆ ಅವರ ಪಿಸ್ತೂಲಿನಲ್ಲಿ ಒಂದಾದ ನಂತರ ಒಂದು ಗುಂಡುಗಳು ಖಾಲಿಯಾಗುತ್ತಿದ್ದರೂ ಕೊನೆಯ ಗುಂಡಿನ ಲೆಕ್ಕ ಕೂಡಾ ಖಚಿತವಾಗಿ ಜಾಗೃತಿಯಲ್ಲಿದ್ದು ಆ ಕೊನೆಯ ಗುಂಡಿನ ಅರಿವು ದೊರೆತ ತಕ್ಷಣದಲ್ಲಿ ಅದನ್ನು ತಮ್ಮ ತಲೆಗೆ ಗುರಿ ಇಟ್ಟುಕೊಂಡರು.
ತಮ್ಮನ್ನು ಯಾವುದೇ ಕ್ಷಣದಲ್ಲೂ ಬ್ರಿಟಿಷರಿಗೆ ಒಪ್ಪಿಸಿಕೊಳ್ಳದೆ ಬ್ರಿಟಿಷ್ ಹಿಂಸಾಚಾರ, ದಮನಕಾರಿ ಪ್ರವೃತ್ತಿಗಳಿಗೆ ಅದೇ ಮಾದರಿಯಲ್ಲಿ ಉತ್ತರ ನೀಡಿ ಇಡೀ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನರಾಗಿದ್ದ ಚಂದ್ರಶೇಖರ್ ಆಜಾದ್ ಅವರ ಮಹಾನ್ ವ್ಯಕ್ತಿತ್ವ ನೆನೆದಾಗಲೆಲ್ಲಾ ದೇಶಭಕ್ತಿಯನ್ನು ಪ್ರಜ್ವಲಿಸುವ ಅಮರ ಜ್ಯೋತಿಯ ಉದ್ದೀಪನವಾದಂತೆನಿಸುತ್ತದೆ. ಹಿಂಸೆಗೆ ಹಿಂಸೆಯ ದಾರಿ ಹಿಡಿದರಾದರೂ ಅವರ ಬದುಕಿನಲ್ಲಿ ಜಾಗೃತವಾಗಿದ್ದ ಸುಸಂಸ್ಕೃತ ನಡಾವಳಿ, ಸ್ತ್ರೀಯರು ಮತ್ತು ಹಿರಿಯರ ಬಗ್ಗೆ ಗೌರವ, ಬಡಜನರ ಬಗ್ಗೆ ಅನುಕಂಪ, ದೇಶಕ್ಕಾಗಿ ಏನನ್ನೂ ಮಾಡಲು ಸಿದ್ಧವಿದ್ದ ಭಕ್ತಿನಿಷ್ಠ ಮನಸ್ಸುಗಳು ನಿರಂತರ ಮನನಯೋಗ್ಯವಾಗಿವೆ.
ಈ ಮಹಾನ್ ದೇಶಭಕ್ತ ಚೇತನಕ್ಕೆ ಸಾಷ್ಟಾಂಗ ಪ್ರಣಾಮಗಳು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: