ಬೆಳಗಾವಿ,ಡಿ.17- ಗ್ರಾಮಪಂಚಾಯ್ತಿಯ ಕೇಂದ್ರ ಸ್ಥಾನಗಳಲ್ಲಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಾಸಕ್ಕೆ ಅನುಕೂಲವಾಗುವಂತೆ ವಸತಿ ಗೃಹ ನಿರ್ಮಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವಪ್ಪ ವಿಧಾನಪರಿಷತ್ಗೆ ತಿಳಿಸಿದರು.
ನಾಮನಿರ್ದೇಶಿತ ಸದಸ್ಯ ಡಾ.ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸುವಾಗ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪಂಚಾಯ್ತಿಗಳಲ್ಲೇ ವಾಸವಿರುವಂತೆ ವಸತಿ ಗೃಹ ಕಟ್ಟಿಸಿಕೊಡಿ ಎಂಬ ಸಲಹೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಪಂಚಾಯ್ತಿಗಳ ಕೇಂದ್ರ ಸ್ಥಾನದಲ್ಲೇ ಮನೆ ಕಟ್ಟಿಸಿಕೊಡುವ ಕೆಲಸ ಮಾಡಲಾಗುವುದು ಎಂದರು.
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಸಿ.ಎಂ.ಲಿಂಗಪ್ಪ, ನಮ್ಮೂರಿನ ಗ್ರಾಮಪಂಚಾಯ್ತಿಯಲ್ಲಿ ಸರ್ಕಾರದ ಕಟ್ಟಡವಿದೆ. ಆದರೆ ಅಲ್ಲಿ ಅಧಿಕಾರಿಗಳು ವಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಗ ಸಚಿವರು ಇಂಥ ಒಂದೆರಡು ಪ್ರಕರಣಗಳು ಇರಬಹುದು. ಪಿಡಿಓಗಳು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸದೆ ಕರ್ತವ್ಯದ ಮೇಲೆ ಹೊರಗೆ ಹೋಗಿರದಿದ್ದರೆ ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಿ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.
ಪಿಡಿಓಗಳ, ಗ್ರಾಪಂ ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮಪಂಚಾಯ್ತಿ ಕೇಂದ್ರ ಸ್ಥಾನದಲ್ಲಿ ವಾಸವಿರುವ ಬಗ್ಗೆ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಒಂದು ವೇಳೆ ಕೇಂದ್ರ ಸ್ಥಾನದಲ್ಲಿ ವಾಸವಿರದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಗ್ರಾಮ ಲೆಕ್ಕಿಗರು ಸ್ಥಳ ನಿಯುಕ್ತಿಗೊಳಿಸಿದ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸವಿರಬೇಕು. ಗ್ರಾಮ ಪಂಚಾಯ್ತಿಗಳಿಗೆ ಸ್ವಯಂ ಸರ್ಕಾರಗಳಾಗಿ ಕಾರ್ಯ ನಿರ್ವಹಿಸಲು ಹೆಚ್ಚಿನ ಅಕಾರ, ಜವಾಬ್ದಾರಿ ನೀಡಲಾಗಿದೆ. ಸರ್ಕಾರದ ಅನುದಾನ ಸೇರಿದಂತೆ ಪ್ರತಿ ಪಂಚಾಯ್ತಿಗೆ ಒಂದು ಕೋಟಿ ರೂ. ಸಿಗುವಂತೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.