ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ನಾಳೆ (ಮೇ 31) ಡಿಪೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪೆಟ್ರೋಲ್ ಬಂಕ್ನಲ್ಲಿ ಸ್ಟಾಕ್ ಇರೋ ಪೆಟ್ರೋಲ್, ಡಿಸೇಲ್ ಮಾತ್ರ ಪೂರೈಕೆ ಮಾಡಲಾಗುತ್ತೆ. ಬಂಕ್ಗಳಲ್ಲಿ ಸ್ಟಾಕ್ ಇಲ್ಲ ಅಂದರೆ ಮಾತ್ರ ತೈಲ ಸಿಗುವುದಿಲ್ಲ. ಸಾಮಾನ್ಯವಾಗಿ ಬಂಕ್ಗಳಲ್ಲಿ ಎರಡರಿಂದ ಮೂರು ದಿನಕ್ಕೆ ಆಗುವಷ್ಟು ಸ್ಟಾಕ್ ಇರುತ್ತದೆ. ಹಾಗಾಗಿ ನಾಳಿನ ಒಂದು ದಿನದ ಮುಷ್ಕರದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಬಂಕ್ ಮಾಲೀಕರು ಹೇಳಿದ್ದಾರೆ. ಅದೇನೇ ಇದ್ದರೂ ಇಂದೇ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳುವುದು ಒಳಿತು.
ಅಷ್ಟಕ್ಕೂ ಮುಷ್ಕರವೇಕೆ?
2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ 1ರೂ. ಕಮಿಷನ್ ನೀಡಬೇಕೆಂಬುದು ಫೆಡರೇಷನ್ನ ಪ್ರಮುಖ ಬೇಡಿಕೆಯಾಗಿತ್ತು. ಆದರೆ ಬೇಡಿಕೆ ಈಡೇರಲಿಲ್ಲ. ‘2017ರಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದಿಗೆ ಹೋಲಿಕೆ ಮಾಡಿದರೆ ದ್ವಿಗುಣವಾಗಿದೆ. ಕಮಿಷನ್ ಹೆಚ್ಚಳ ಮಾಡಬೇಕೆಂದು ಕೇಂದ್ರ ಪೆಟ್ರೋಲಿಯಂ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಬೇಕೆಂಬ ಕಾರಣಕ್ಕಾಗಿಯೇ ಪ್ರತಿಭಟನೆ ನಡೆಸುತ್ತಿದ್ದೇವೆ’ ಎನ್ನುತ್ತಾರೆ ಮಾಲೀಕರು.
ಬಂಕ್ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. ಅಲ್ಲದೆ, ಕಂಪೆನಿಗಳ ಡೀಲರ್ಸ್ಗಳು ಬಂಕ್ಗಳಲ್ಲಿ ಸಿಬ್ಬಂದಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸೂಚನೆ ಕೊಡುತ್ತಾರೆ.
ಶೌಚಾಲಯ, ತಿಂಡಿ, ಊಟದ ವ್ಯವಸ್ಥೆ, ಶುಚಿತ ಹೀಗೆ ಎಲ್ಲವನ್ನೂ ನಿರ್ವಹಿಸಬೇಕಾಗಿರುವುದರಿಂದ ಬಂಕ್ ನಡೆಸುವುದೇ ದುಸ್ತರವಾಗಿದೆ ಎಂಬುದು ಮಾಲೀಕರ ಅಳಲು. ನಾವು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಐದು ವರ್ಷವಾದರೂ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನು ಪ್ರತಿ ದಿನ ಲೀಟರ್ಗೆ ಪೈಸೆಗಳಲ್ಲಿ ಏರಿಕೆ ಮಾಡಿದರು. ಆದರೆ, ಕಳೆದ ವಾರ ಇದ್ದಕ್ಕಿದ್ದಂತ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಸರಿ ಸುಮಾರು 10ರಿಂದ 8ರೂ.ವರೆಗೆ ಕಡಿತ ಮಾಡಿತು. ಇದರಿಂದ ಪ್ರತಿಯೊಂದು ಬಂಕ್ಗಳಿಗೆ ಕನಿಷ್ಠ 5ರಿಂದ 25 ಲಕ್ಷವರೆಗೂ ನಷ್ಟವಾಯಿತು.
ಮೊದಲೇ ಸಂಕಷ್ಟದಲ್ಲಿರುವ ನಮಗೆ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ಅಳಲು ತೋಡಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್ನಿಂದ ಹಿಂದುರಿಗಿದ ತಕ್ಷಣವೇ ಭೇಟಿಯಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಲಿದ್ದೇವೆ.
ಅಲ್ಲದೆ, ಶೀಘ್ರದಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಸಹ ಭೇಟಿ ಮಾಡಲಿದ್ದೇವೆ, ನಾವು ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿಲ್ಲ. ಬಂಕ್ ಮಾಲೀಕರ ಸಂಕಷ್ಟವನ್ನು ಜನರಿಗೆ ತಿಳಿಸುವ ಸದುದ್ದೇಶವಾಗಿದೆ. ನಮ್ಮ ಪ್ರತಿಭಟನೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada