ರಾಮಕೃಷ್ಣ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ‘ಸಿದ್ದಾಪುರ’ ತಾಲೂಕಿನ ದೊಡ್ಮನೆ ಗ್ರಾಮದಲ್ಲಿ 1926ರ ಅಗಸ್ಟ್ 29ರಂದು ಮಹಾಬಲೇಶ್ವರ ಹೆಗಡೆ ಹಾಗೂ ಸರಸ್ವತಿ ಹೆಗ್ಡೆ ದಂಪತಿಗಳಿಗೆ ಮಗನಾಗಿ ಜನಿಸಿದರು. ಇವರದ್ದು ಕೃಷಿಕ ಕುಟುಂಬ.
ಬಾಲ್ಯದಿಂದಲೂ ರಾಮಕೃಷ್ಣ ಹೆಗಡೆ ಅವರಿಗೆ ಸಮಾಜದ ಎಲ್ಲ ವರ್ಗೀಯ ಜನರ ಬಗೆಗೂ ಸಮಾನ ಗೌರವ. ಈ ಕುರಿತಾಗಿ ಅವರು ಒಮ್ಮೆ ಹೇಳಿದ್ದು ಹೀಗೆ: “ನನಗಾಗ ಕೇವಲ ಆರು ಅಥವಾ ಏಳು ವರ್ಷವಿರಬಹುದು. ಸಿದ್ದಾಪುರದ ಗದ್ದೆಯ ನಡುವೆ ಇದ್ದ ನಮ್ಮ ಮನೆ ಆ ಕಾಲಕ್ಕೆ ಬ್ರಿಟಿಷರ ವಿರುದ್ಧ ಹೋರಾಡುತಿದ್ದ ಸ್ವಾತಂತ್ರ್ಯ ಹೋರಾಟಗಾರರಿಗೆ ಒಂದು ರೀತಿಯಲ್ಲಿ ತಂಗುದಾಣವಾಗಿತ್ತು. ಶಿವಮೊಗ್ಗ ಮತ್ತು ಉತ್ತರ ಕನ್ನಡ ಗಡಿಭಾಗದಲ್ಲಿದ್ದ ನಮ್ಮ ಮನೆ ಸ್ವಾತಂತ್ರ್ಯ ಹೋರಾಟಗಾರರು ಪೋಲಿಸರಿಂದ ತಪ್ಪಿಸಿಕೊಳ್ಳಲು ಹೇಳಿ ಮಾಡಿಸಿದಂತಹ ಸ್ಥಳವಾಗಿತ್ತು. ಶಿವಮೊಗ್ಗ ಪೋಲಿಸರಿಂದ ತಪ್ಪಿಸಿಕೊಳ್ಳಲು ಬೇಲಿ ನೆಗೆದು ನಮ್ಮ ಮನೆಗೆ ಬಂದರೆ ಹಿಡಿಯುವಂತಿರಲಿಲ್ಲ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆ ಪೋಲಿಸರು ಬಂದರೆ ಸಲೀಸಾಗಿ ಬೇಲಿ ನೆಗೆದು ಶಿವಮೊಗ್ಗ ಗಡಿಪ್ರದೇಶಕ್ಕೆ ತೆರಳಬಹುದಾಗಿತ್ತು. ಮೂಲತಃ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಮಹಾಬಲೇಶ್ವರ ಹೆಗಡೆ ಯಾರೇ ನಮ್ಮ ಮನೆಗೆ ಬಂದರೂ ಜಾತಿ ಧರ್ಮ ಬೇಧವಿಲ್ಲದೆ ಆತಿಥ್ಯ ನೀಡುತಿದ್ದರು. ನನ್ನ ತಾಯಿ ಸರಸ್ವತಿ ಹೆಗಡೆ ಕೂಡ ಅಕ್ಷರಶಃ ಅನ್ನಪೂರ್ಣೆಯಂತೆ ನಡೆದುಕೊಳ್ಳುತಿದ್ದರು. ನಮ್ಮ ಮನೆ ಬ್ರಿಟಿಷರಿಗೆ ತಲೆನೋವಾದ ಕಾರಣ ಸರ್ಕಾರ ಗದ್ದೆಯ ಬಯಲಿನಲ್ಲಿದ್ದ ನಮ್ಮ ಮನೆಯನ್ನು ಧ್ವಂಸ ಮಾಡುವಂತೆ ಪೋಲಿಸರಿಗೆ ಆದೇಶ ಜಾರಿ ಮಾಡಿತು. ಒಂದು ಬೆಳಗಿನ ಜಾವ ಮನೆಗೆ ಬಂದ ಪೋಲಿಸರು ನಮ್ಮ ಹೆಂಚಿನ ಮನೆ, ಅದರೊಳಗೆ ಅತಿಥಿಗಳಿಗಾಗಿ ನಿರ್ಮಿಸಿದ್ದ ಅಟ್ಟ, ಪಾತ್ರೆ, ದಿನಸಿ ಸಾಮಾನುಗಳನ್ನು ನಾಶ ಮಾಡಿ ಹೊರಟು ಹೋದರು. ನನ್ನ ಅಪ್ಪ, ಅಮ್ಮ, ನಾನು, ನನ್ನ ಸಹೋದರ ಎಲ್ಲರೂ ಬಯಲಿಗೆ ಬಿದ್ದೆವು. ದೃತಿಗೆಡೆದ ನನ್ನಪ್ಪ ನನ್ನನ್ನು ತಮ್ಮ ಹೆಗಲ ಮೇಲೆ ಕೂರಿಸಿಕೊಂಡು ಸಿದ್ದಾಪುರದ ಸಂತೆಗೆ ಹೋಗಿ ಒಂದಿಷ್ಟು ಮಡಕೆಗಳನ್ನು ಕೊಂಡು ತಂದರು. ನಾವು ಸಂತೆಯಿಂದ ಬರುವ ವೇಳೆಗೆ ನಮ್ಮೂರಿನ ಸುತ್ತ ಮುತ್ತಲಿನ ಜನ ಅಕ್ಕಿ, ಬೇಳೆ, ಉಪ್ಪು, ಮೆಣಸಿನಕಾಯಿ, ಸಾಂಬಾರ್ ಪುಡಿ ಹೀಗೆ ಹಲವು ವಸ್ತುಗಳನ್ನು ಅಮ್ಮನ ಬಳಿ ಕೊಟ್ಟು ಹೋಗಿದ್ದರು. ಆ ದಿನ ನನ್ನಮ್ಮ ಬಯಲಿನಲ್ಲಿ ಕಲ್ಲುಗಳನ್ನು ಇಟ್ಟು ಅಡುಗೆ ಮಾಡಿ ನಮಗೆ ಬಡಿಸಿದಳು. ಆ ದಿನ ನಾನು, ನನ್ನ ಕುಟುಂಬ ತಿಂದ ಅನ್ನ, ಬೇಳೆ ಅಥವಾ ಉಪ್ಪು ಯಾರ ಮನೆಯದು, ಯಾರ ಜಾತಿಯದು, ಯಾವ ಧರ್ಮದ್ದೆಂದು ನಾವ್ಯಾರೂ ಕೇಳಲಿಲ್ಲ. ಎಲ್ಲಾ ಧರ್ಮದ, ಎಲ್ಲ ಜಾತಿಯ ಋಣ ನನ್ನ ರಕ್ತದಲ್ಲಿ ಹರಿಯುತ್ತಿದೆ.”
ಹೆಗಡೆ ಕಾಶಿ ವಿದ್ಯಾಪೀಠ, ಬನಾರಸ್ ಹಾಗು ಲಕ್ನೋ ವಿಶ್ವವಿದ್ಯಾಲಯಗಳಲ್ಲಿ ಓದಿ ನ್ಯಾಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1942ರ ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಸೆರೆಮನೆ ವಾಸವನ್ನು ಅನುಭವಿಸಿದ ಹೆಗಡೆಯವರು ತಮ್ಮ 20ನೇ ವಯಸಲ್ಲೇ ಕರ್ನಾಟಕದಲ್ಲಿ ರೈತ ಚಳುವಳಿಯ ರೂವಾರಿಯಾಗಿದ್ದರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ 1954ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಹೆಗಡೆಯವರು 1957ರಲ್ಲಿ ಮೊದಲ ಬಾರಿಗೆ ಕರ್ನಾಟಕ ವಿಧಾನ ಸಭೆಗೆ ಆಯ್ಕೆಯಾದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: