ಮಂಡಿ ನೋವಿನ ಗಾಯದ ಸಮಸ್ಯೆಯಿಂದ ಚೇತರಿಸಿರುವ ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ, ಬಾರ್ಡರ್-ಗವಾಸ್ಕರ್ ಟ್ರೋಫಿ ಸಲುವಾಗಿ ನಡೆಯಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಂದಹಾಗೆ ಆಡುವ 11ರ ಬಳಗದಲ್ಲಿ ಜಡೇಜಾಗೆ ಸ್ಥಾನ ಸಿಗುವುದು ಅಷ್ಟು ಸುಲಭದ್ದಲ್ಲ. ಏಕೆಂದರೆ ಇದಕ್ಕೂ ಮುನ್ನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜಡೇಜಾ ತಮ್ಮ ಫಿಟ್ನೆಸ್ ಸಾಬೀತು ಪಡಿಸಬೇಕಿದೆ. ಸೌರಾಷ್ಟ್ರ ತಂಡ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜನವರಿ 24ರಿಂದ ತಮಿಳುನಾಡು ವಿರುದ್ಧ ಕ್ವಾರ್ಟರ್ಫೈನಲ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಸೌರಾಷ್ಟ್ರ ಪರ ಜಡೇಜಾ ಕಣಕ್ಕಿಳಿಯಲಿದ್ದಾರೆ ಎಂದು ವರದಿಗಳು ಹೇಳಿವೆ.2022ರ ಸೆಪ್ಟೆಂಬರ್ನಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಿದ್ದ ರವೀಂದ್ರ ಜಡೇಜಾ ಟೂರ್ನಿ ನಡುವೆ ಮಂಡಿಗೆ ಗಾಯ ಮಾಡಿಕೊಂಡು ಕ್ರಿಕೆಟ್ನಿಂದ ದೂರ ಉಳಿದರು. ಬಳಿಕ ಶಸ್ತ್ರಚಿಕಿತ್ಸೆಗೂ ಒಳಪಟ್ಟ ಸ್ಟಾರ್ ಆಲ್ರೌಂಡರ್, ಇದೀಗ ಕಮ್ಬ್ಯಾಕ್ ಎದುರು ನೋಡುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಇರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರಕ್ಕೆ ಒಳಪಟ್ಟಿದ್ದಾರೆ. ಎನ್ಸಿಎ ಫಿಟ್ನೆಸ್ ಪ್ರಮಾಣ ಪತ್ರ ನೀಡಿದ ಬಳಿಕವಷ್ಟೇ ಜಡೇಜಾ ಟೀಮ್ ಇಂಡಿಯಾ ಸೇರಲಿದ್ದಾರೆ.
https://play.google.com/store/apps/details?id=com.speed.newskannada