ಬೆಳಗಾವಿ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಸರಕಾರ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿರುವುದನ್ನು ಎಚ್ಚೆತ್ತಿರುವ ರಾಜ್ಯ ಸರಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ.
ವಿಧಾನಪರಿಷತ್ನಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಡಾ.ವೈ.ಎ.ನಾರಾಯಣಸ್ವಾಮಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರಿಸಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ 14660 ಪ್ರಕರಣಗಳಲ್ಲಿ 38,888 ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38546 ಪ್ರಕರಣಗಳಲ್ಲಿ 36229 ಎಕರೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದನ್ನು ವಿವರಿಸಿದ ಸಚಿವ ಅಶೋಕ ಅವರು ಅತಿಕ್ರಮಿಸಲ್ಪಟ್ಟ ಗೋಮಾಳ ಮತ್ತು ಸರಕಾರಿ ಜಮೀನುಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4940 ಪ್ರಕರಣಗಳಲ್ಲಿ 16420 ಎಕರೆ,ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 10892 ಪ್ರಕರಣಗಳಲ್ಲಿ 11779 ಎಕರೆ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಬೆಂಗಳೂರು ಡಿಸಿಗೆ ಪ್ರತಿ ಶನಿವಾರ ಒತ್ತುವರಿ ಪ್ರಕರಣಗಳ ಪರಿಶೀಲನೆ ಜವಾಬ್ದಾರಿ: ಸರಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಸಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿರುವುದನ್ನು ಹಾಗೂ ಸಮಿತಿಗಳು ಕಾರ್ಯಪ್ರವೃತ್ತರಾಗಿರುವುದನ್ನು ಸದನದ ಗಮನಕ್ಕೆ ತಂದ ಸಚಿವ ಅಶೋಕ ಅವರು ಬೆಂಗಳೂರು ನಗರದಲ್ಲಿ ಅಪಾರ ಪ್ರಮಾಣದಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಪ್ರತಿ ಶನಿವಾರ ಈ ಒತ್ತುವರಿ ಪ್ರಕರಣಗಳ ಪರಿಶೀಲನೆ ಮತ್ತು ವಶಕ್ಕೆ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು.