ಬೆಂಗಳೂರು: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣದ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಸಿಎಂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಧ್ಯಂತರ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.ಸಾರಿಗೆ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ಸಿಎಂ ತಿಳಿಸಿದ್ದಾರೆ.ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಎಂ.ಆರ್. ಶ್ರೀನಿವಾಸಮೂರ್ತಿ, ತಾವು ಅಧ್ಯಕ್ಷರಾದ ಬಳಿಕ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, BMTC ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada