ಯಾದಗಿರಿ: ‘ಭೂಮಿ ತಂತ್ರಾಂಶ’ದಡಿ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಸಕಾಲಕ್ಕೆ ವಿಲೇವಾರಿ ಮಾಡುವ ಮೂಲಕ ನಮ್ಮ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ತೃತೀಯ ಸ್ಥಾನ ಪಡೆದಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣ ದಲ್ಲಿ ಬುಧವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯ ಸಾಧನೆಗೆ ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ, ಕಾರ್ಯತತ್ಪರತೆ ಯಿಂದಾಗಿ ಉತ್ತಮ ಸಾಧನೆ ಮಾಡಿದೆ ಎಂದರು.ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಪ್ರಕರಣಗಳನ್ನು ಹಂಚಿಕೆ ಮಾಡಿ ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಪರವಾನಗಿ ಭೂಮಾಪಕರ ಪ್ರಗತಿಯನ್ನು ನಿರಂತರವಾಗಿ ಗಮನಿಸಬೇಕು ಎಂದು ಭೂ ದಾಖಲೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.ತ್ರೀ ಆಯಂಡ್ ನೈನ್ (3 ಮತ್ತು 9 ಕಲಂ) ಮಿಸ್ ಮ್ಯಾಚ್, ಪೈಕಿ ಪಹಣಿ, ಮೋಜನಿ ಕಡತಗಳು ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಹಾಗೂ ಸಕಾಲ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದರು. ಸೇವೆಗಳನ್ನು ಆದ್ಯತೆಯಲ್ಲಿ ಒದಗಿಸಿ ಪ್ರಗತಿ ಕುಂಠಿತವಾಗದಂತೆ ಪ್ರಗತಿ ಸಾಧಿಸಬೇಕು ಎಂದರು.ಜಿಲ್ಲೆಯಲ್ಲಿ 2022ರ ಜನವರಿಯಲ್ಲಿ ಯಾದಗಿರಿ 8, ಸುರಪುರ 12, ಗುರುಮಠಕಲ್ 8, ಹುಣಸಗಿ 5 ಸೇರಿದಂತೆ ಒಟ್ಟು 33 ಗ್ರಾಮಗಳ ಸ್ಮಶಾನ ಭೂಮಿಗಾಗಿ ಜಮೀನು ಮಂಜೂರು ಮಾಡಲಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇನ್ನೂ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಜಮೀನಿಗಾಗಿ ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಯಾದಗಿರಿ ಜಿಲ್ಲೆಯಲ್ಲಿ 10,902 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಇದರಲ್ಲಿ 10,478 ಹೆಕ್ಟೇರ್ 12,165 ರೈತರಿಗೆ ₹ 11.74 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಉಪ ವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್ ಮಧುರಾಜ್, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ವಡಿಗೇರಾ ತಹಶೀಲ್ದಾರ್ ಸುರೇಶ್ ಅಂಕಲಗಿ, ಗುರುಮಠಕಲ್ ತಹಶೀಲ್ದಾರ್ ಶರಣಬಸವ, ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್ ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada