ಯಾದಗಿರಿ: ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ನ ಆವರಣದಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ತಗುಲಿದ ಬೆಂಕಿಯಿಂದ ಮೃತಪಟ್ಟವರ ಕುಟುಂಬಕ್ಕೆ ಮತ್ತು ಗಾಯಾಳುಗಳಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಗೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ತಿಳಿಸಿದ್ದಾರೆ.ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು 24 ಜನ ಗಾಯಗೊಂಡಿದ್ದಾರೆ. ಇದರಲ್ಲಿ ನಿಂಗಮ್ಮ ಬಸವಂತರಾಯ ಹೆರುಂಡಿ (90), ಆಧ್ಯಾ ಬಾಬುರಾವ್ (4), ಮಹಾಂತೇಶ ಸಂಗಣ್ಣ ಲಕ್ಕಶೆಟ್ಟಿ (15 ತಿಂಗಳು), ಗಂಗಮ್ಮ ದೇವಿಂದ್ರಪ್ಪ ಭಂಟನೂರ (48) ಒಟ್ಟು ನಾಲ್ಕು ಜನರು ಮೃತಪಟ್ಟಿದ್ದಾರೆ . ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ 3 ಜನ, ಯುನೈಟೆಡ್ ಆಸ್ಪತ್ರೆಯಲ್ಲಿ 3 ಜನ, ಬಸವೇಶ್ವರ ಆಸ್ಪತ್ರೆಯಲ್ಲಿ 12 ಜನ, ಚಿರಾಯು ಆಸ್ಪತ್ರೆಯಲ್ಲಿ ಇಬ್ಬರು ಸೇರಿ 20 ಗಾಯಾಳುಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ 4 ಜನ ಕುಟುಂಬಗಳಿಗೆ ಹಾಗೂ ಗಾಯಗೊಂಡ 20 ಜನ ಗಾಯಾಳುಗಳಿಗೆ ತುರ್ತಾಗಿ ಪರಿಹಾರ ನೀಡಲು ಪರಿಹಾರ ನಿಧಿ ಶಾಖೆಗೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ತನಿಖೆಗೆ ತಂಡ: ದೋರನಹಳ್ಳಿ ಘಟನೆಗೆ ಸಂಬಂಧಿಸಿ ವಿಶೇಷ ತನಿಖೆ ರಚಿಸಲಾಗಿದೆ. ಯಾವ ರೀತಿ ಘಟನೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada