ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಕೆರೆ ತಟದಲ್ಲಿ ‘ಪವರ್ ಸ್ಟಾರ್’ ಡಾ ಪುನೀತ್ ರಾಜ್ಕುಮಾರ್ ಅವರ 23 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಬಳ್ಳಾರಿ ಉತ್ಸವಕ್ಕೆ ಸಾಕ್ಷಿಯಾದರು.
ಪುನೀತ್ ರಾಜ್ಕುಮಾರ್ ಪ್ರತಿಮೆ ಅನಾವರಣ ಹಾಗೂ ಡಾ. ರಾಜ್ಕುಮಾರ್ ಕುಟುಂಬ ಸದಸ್ಯರು ಆಗಮಿಸುತ್ತಾರೆ ಎಂದು ಗೊತ್ತಾಗುತ್ತಿದ್ದಂತೆಯೇ ಎರಡು ಸಾವಿರಕ್ಕೂ ಹೆಚ್ಚು ಯುವಕರು, ಯುವತಿಯರು ನಲ್ಲಚೆರವು ಪ್ರದೇಶಕ್ಕೆ ಆಗಮಿಸಿದ್ದರು. ಪ್ರತಿಮೆ ಅನಾವರಣಗೊಳ್ಳುತ್ತಿದ್ದಂತೆ ಬ್ಯಾರಿಕೇಡ್ಗಳನ್ನು ಕಿತ್ತು ನುಗ್ಗಿದರು. ನಿರೀಕ್ಷೆಗೂ ಮೀರಿ ಬಂದ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟ ಪೊಲೀಸರು, ಲಘುಲಾಠಿ ಪ್ರಹಾರ ನಡೆಸಿ, ನಿಯಂತ್ರಿಸಿದರು. ಸಮಾರಂಭ ಮುಗಿಯುವ ಹೊತ್ತಿಗೆ ಮೂರು ಸಲ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಸಾವಿರಾರು ಜನರ ನಡುವೆ ರಾಜ್ಕುಮಾರ್ ಕುಟುಂಬದ ಸದಸ್ಯರು ಹಾಗೂ ಜಿಲ್ಲಾ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುವುದು ಕಷ್ಟಸಾಧ್ಯವಾಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದರಿಂದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸುತ್ತುವರಿದು ಸಚಿವರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆತಂದರು. ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಮೇಯರ್ ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಪಿ.ಪಾಲಣ್ಣ ಮುಂತಾದವರು ಹಾಜರಿದ್ದರು.
https://play.google.com/store/apps/details?id=com.speed.newskannada