ನವದೆಹಲಿ, ಫೆಬ್ರವರಿ 10: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರರಕ್ಕೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ , ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.ಆದರೆ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ, ಸದ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ, ಆದೇಶದ ಬಳಿಕವೂ ಅಗತ್ಯ ಬಿದ್ದರೆ ಮುಂದೆ ನೋಡೋಣ, ಸದ್ಯ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿರುವುದು ವರದಿಯಾಗಿದೆ.ಇನ್ನು ಕರ್ನಾಟಕದಲ್ಲಿ, ಹಿಜಾಬ್ ವಿಷಯದಲ್ಲಿ ಯಾರೂ ಸಹ ಹೇಳಿಕೆಗಳನ್ನು ನೀಡದೆ ನಮ್ಮಷ್ಟಕ್ಕೆ ನಾವೇ ನಿಯಂತ್ರಣ ಹಾಕಿಕೊಳ್ಳಬೇಕು ಮತ್ತು ನ್ಯಾಯಾಲಯದ ಆದೇಶ ಬರುವವರೆಗೆ ಕಾಯೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕರ್ನಾಟಕದಲ್ಲಿ ನಡೆಯುತ್ತಿರುವುದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಕರಣವನ್ನು ತುರ್ತಾಗಿ ಆಲಿಸಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಕೋರಿದರು. “ಈ ಅರ್ಜಿ ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ್ದಾಗಿದೆ. ಇದು (ವಿವಾದ) ದೇಶದೆಲ್ಲೆಡೆ ಹರಡುತ್ತಿದೆ. ಈ ಮಧ್ಯೆ (ಶಾಲಾ ವಿದ್ಯಾರ್ಥಿಗಳಿಗೆ) ಪರೀಕ್ಷೆಗಳಿಗೆ ಇನ್ನು ಎರಡು ತಿಂಗಳಷ್ಟೇ ಇದೆ” ಎಂದರು.ಆದರೆ ಸಿಜೆಐ ರಮಣ “ಕಾಯೋಣ ಮಿಸ್ಟರ್ ಸಿಬಲ್. ಹೈಕೋರ್ಟ್ ನಿರ್ಧರಿಸಲಿ. ನೀವು ವಿಷಯವನ್ನು ವರ್ಗಾಯಿಸಲು ಬಯಸುತ್ತೀರಾ?” ಎಂದು ಪ್ರಶ್ನಿಸಿದರು. ಆಗ “ಪ್ರಕರಣವನ್ನು ಪಟ್ಟಿ ಮಾಡಿ, ಆದರೆ ಸದ್ಯಕ್ಕೆ ಯಾವುದೇ ಆದೇಶ ನೀಡುವುದು ಬೇಡ” ಎಂದು ಸಿಬಲ್ ಸಲಹೆ ಇತ್ತರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಸಮಸ್ಯೆ ಏನೆಂದರೆ, ನಾವು ಈಗ ಪ್ರಕರಣವನ್ನು ಪಟ್ಟಿ ಮಾಡಿದರೆ ಹೈಕೋರ್ಟ್ ಅದನ್ನು ಎಂದಿಗೂ ಆಲಿಸುವುದಿಲ್ಲ, ಒಂದೆರಡು ದಿನ ಕಾಯಿರಿ” ಎಂದರು.ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವುದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠ ಇಂದು ಕೈಗೆತ್ತಿಕೊಳ್ಳಲಿದೆ. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದ ನ್ಯಾ. ದೀಕ್ಷಿತ್ ಅವರು ಬುಧವಾರ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಮಂಗಳವಾರ ವಿಚಾರಣೆ ಆರಂಭಿಸಿದ್ದ ನ್ಯಾಯಾಲಯ ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಕೇಳಿತ್ತು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada