ಸಾಗರ: ಇಲ್ಲಿನ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ಪ್ರಮುಖರು ಹುಮನಾಬಾದ್ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ಅವರ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಿದರು.ಉಪವಿಭಾಗಾಧಿಕಾರಿ ಕಚೇರಿ ಎದುರು ಸಭೆ ನಡೆಸಿದ ನೌಕರರ ಸಂಘದ ಪ್ರಮುಖರು, ತಹಶೀಲ್ದಾರರ ಮೇಲೆ ಗೂಂಡಾ ಪ್ರವೃತ್ತಿ ತೋರಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಜಿ.ಪರಮೇಶ್ವರಪ್ಪ ಮಾತನಾಡಿ, ‘ಈಚಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಮೇಲೆ ರಾಜ್ಯದ ವಿವಿಧ ಭಾಗಗಳಲ್ಲಿ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ನೌಕರರ ಆತ್ಮಸ್ಥೈರ್ಯ ಕುಂದುವುದು ಖಚಿತ. ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದವರನ್ನು ಬಿಗಿಯಾದ ಕಾನೂನಿನ ಚೌಕಟ್ಟಿನ ವ್ಯಾಪ್ತಿಯೊಳಗೆ ತರಬೇಕು’ ಎಂದು ಒತ್ತಾಯಿಸಿದರು.ನೌಕರರ ಸಂಘದ ಗೌರವಾಧ್ಯಕ್ಷ ಜಿ. ಬಸವರಾಜ್, ಎಲ್.ಎಂ. ಹೆಗಡೆ, ಮಹೇಶ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕಲ್ಲಪ್ಪ ಮೆಣಸಿನಾಳ್, ರಾಘವೇಂದ್ರ, ರಘು, ಕೀರ್ತಿ, ಮಂಜುಳಾ, ಗೌರಮ್ಮ, ಶಾಂತಮೂರ್ತಿ, ಕೃಷ್ಣಪ್ಪ, ಮಂಜುನಾಥ್ ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada