ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆಯಿಂದ ಸರ್ಕಾರಿ ನೌಕರರ ಸಂಘದಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರಕ್ಕೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಬೆಂಬಲ ನೀಡಿದ್ದು, ನಾಳೆ ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಲಿದ್ದು, ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ.
ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ಅವರು, ನಾಳೆ ಯಾವುದೇ ಒಪಿಡಿ ಸೇವೆ ಇರುವುದಿಲ್ಲ. ನಾಳೆಯಿಂದ ರಾಜ್ಯದಲ್ಲಿ ಕೇವಲ ತುರ್ತು ಸೇವೆಗಳು ಮಾತ್ರ ಸಿಗಲಿದೆ. ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸೇವೆಗಳು ಮಾತ್ರ ಇರುತ್ತದೆ ಎಂದರು.
ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 19 ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಲಿದೆ. ನಮ್ಮ ಹೋರಾಟ 7ನೇ ವೇತನ ಆಯೋಗ ಜಾರಿಯಾಗೋವರೆಗೆ ನಡೆಯಲಿದೆ ಎಂದು ತಿಳಿಸಿದರು.
ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ, ನಾಳೆಯಿಂದ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು – ಸಿ.ಎಸ್ ಷಡಕ್ಷರಿ
ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ನಮ್ಮ ಮುಷ್ಕರವನ್ನು ತಡೆಯೋದಕ್ಕೆ ರಾಜ್ಯ ಸರ್ಕಾರ ಎಸ್ಮಾ ಜಾರಿ ಮಾಡಿದರು ಹೆದರವುದಿಲ್ಲ. ನಮ್ಮನ್ನು ಜೈಲಿಗೆ ಕಳುಹಿಸಿದ್ರೂ ನಾವು ಜಗ್ಗುವುದಿಲ್ಲ. ಲಕ್ಷಾಂತರ ಸರ್ಕಾರಿ ನೌಕರರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಎಸ್ಮಾ ಜಾರಿ ಮಾಡಿದ ಯಾವುದೇ ಸರ್ಕಾರ ಉಳಿದಿಲ್ಲ ಎಂಬುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಗುಡುಗಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಾಳೆಯಿಂದ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುತ್ತಾರೆ. ಈ ಹಿಂದೆ ಹಲವು ಬಾರಿ ಮಧ್ಯಂತರ ವರದಿ ಜಾರಿ ಮಾಡಬೇಕೆಂದು ನಾವು ವಿನಂತಿ ಮಾಡಿದ್ದೆವು. ಆಗಲೂ ಪರಿಶೀಲನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು ಎಂದರು.
ಇಡೀ ದೇಶದಲ್ಲೇ ಕನಿಷ್ಠ ವೇತನ ಪಡೆಯುತ್ತಿರುವ ನೌಕರರೆಂದರೇ ಕರ್ನಾಟಕದ ಸರ್ಕಾರಿ ನೌಕರರು ಆಗಿದ್ದಾರೆ. ಬೇರೆ ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಾಗಿದೆ. ರಾಜ್ಯದಲ್ಲಿ ಶೇ.39ರಷ್ಟು ಹುದ್ದೆ ಖಾಲಿ ಇದ್ದಾವೆ ಎಂದು ತಿಳಿಸಿದರು.
ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೇ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯುವುದಾಗಿ ಘೋಷಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada