ಬೆಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ಶಿಕ್ಷೆ ಪ್ರಶ್ನಿಸಿ ಮತ್ತು ಜಾಮೀನು ಕೋರಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಅವರ ಹೆಂಡತಿ, ಮಗ ಹಾಗೂ ಹೆಂಡತಿಯ ಗೆಳೆಯ ಸೇರಿ ಕೊಲೆ ಮಾಡಿ, ಹೋಮದ ಕುಂಡದಲ್ಲೇ ಸುಟ್ಟುಹಾಕಿದ್ದರು.
2016ರ ಜುಲೈ 28ರಂದು ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ರಾಜೇಶ್ವರಿ ತನ್ನ ಗೆಳೆಯನಾಗಿದ್ದ ಅರ್ಚಕ ನಿರಂಜನ್ ಭಟ್ ಸಹಾಯದಿಂದ ಆ ಶವವನ್ನು ಮಣ್ಣು ಮಾಡಲು ನಿರ್ಧರಿಸಿದ್ದಳು. ಇದಕ್ಕೆ ಪ್ಲಾನ್ ರೂಪಿಸಿದ್ದ ಆ ಮೂವರು ಮನೆಯಲ್ಲಿ ಹೋಮ ಮಾಡಿ, ಭಾಸ್ಕರ್ ಶೆಟ್ಟಿ ಶವವನ್ನು ಹೋಮಕುಂಡಕ್ಕೆ ಹಾಕಿ ಸುಟ್ಟುಹಾಕಿದ್ದರು.
ಜುಲೈ 31ರಂದು ಭಾಸ್ಕರ್ ಶೆಟ್ಟಿ ಅವರ ತಾಯಿ ತಮ್ಮ ಮಗ ನಾಪತ್ತೆಯಾಗಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಅರ್ಚಕ ನಿರಂಜನ್ ಭಟ್, ಆತನ ತಂದೆ ಶ್ರೀನಿವಾಸ್ ಭಟ್, ಮತ್ತು ಕಾರು ಚಾಲಕ ರಾಘವೇಂದ್ರನನ್ನು ಬಂಧಿಸಲಾಗಿತ್ತು.
ವಿಚಾರಣೆ ನಡೆಸಿದ್ದ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಐದನೇ ಆರೋಪಿ ಚಾಲಕ ರಾಘವೇಂದ್ರನನ್ನು ಖುಲಾಸೆಗೊಳಿಸಲಾಗಿದೆ. ನಾಲ್ಕನೇ ಆರೋಪಿ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada