ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ಹೇಳಿಕೆಯನ್ನು ಕಾಂಗ್ರೆಸ್ನವರು ತಪ್ಪಾಗಿ ಅರ್ಥೈಸಿಕೊಂಡು, ತಪ್ಪು ಅಭಿಪ್ರಾಯವನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಜನ ವಿರೋಧಿ ಧೋರಣೆ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.
ವಿರೋಧ ಪಕ್ಷದವರು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ. ಇದರಲ್ಲಿ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಖಂಡಿತವಾಗಿ ರಾಜಕೀಯವಾಗಿ ಅಥವಾ ಇನ್ಯಾವುದೇ ರೀತಿಯಲ್ಲಿ ಅವರಿಗೆ ಲಾಭವಾಗುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.
‘ಕಾನೂನು ಉಲ್ಲಂಘನೆ ಆಗುವ ಯಾವುದೇ ಹೇಳಿಕೆಯನ್ನು ಈಶ್ವರಪ್ಪ ನೀಡಿಲ್ಲ. ಮಾಡದ ತಪ್ಪಿಗೆ ಧರಣಿ ಮಾಡಲು ಹೊರಟಿರುವುದನ್ನು ನೋಡಿದರೆ ಕಾಂಗ್ರೆಸ್ನವರು ಎಷ್ಟು ತಳಮಟ್ಟಕ್ಕೆ ಹೋಗಿದ್ದಾರೆ ಎಂಬುದು ಗೊತ್ತಾಗುತ್ತದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಂತರಿಕವಾಗಿ ಚಿಂತನೆ ನಡೆಸಬೇಕು. ಇವರ ಧರಣಿಯನ್ನು ಸಾರ್ವಜನಿಕರೂ ಒಪ್ಪುವುದಿಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚೆ ಮಾಡುತ್ತಾರೆ ಎಂದು ಸಾರ್ವಜನಿಕರು ಕಾದು ನೋಡುತ್ತಿದ್ದಾರೆ. ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗಾಗಿ ಜನರ ಹಿತವನ್ನು ಬಲಿಕೊಡುತ್ತಿದೆ’ ಎಂದು ಹೇಳಿದರು.
ತಾರ್ಕಿಕ ಅಂತ್ಯವೆಂಬುದಿಲ್ಲ: ‘ಈ ವಿಚಾರವಾಗಿ ಸಭಾಧ್ಯಕ್ಷರ ಜತೆ ಎರಡು ಸಭೆಗಳನ್ನು ನಡೆಸಿ, ಇದನ್ನು ಹೆಚ್ಚು ಬೆಳೆಸುವುದು ಬೇಡ ಎಂದು ತಿಳಿಸಿದೆವು. ಆದರೆ, ಅವರು ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದ್ದಾರೆ. ಇದಕ್ಕೆ ಯಾವುದೇ ತಾರ್ಕಿಕ ಅಂತ್ಯವೆಂಬುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೇನೆ’ ಎಂದು ಬೊಮ್ಮಾಯಿ ಹೇಳಿದರು.
‘ಎಲ್ಲರ ಮಕ್ಕಳು ಕೂಡಿ ವಿದ್ಯಾರ್ಜನೆ ಮಾಡಬೇಕು. ಇದಕ್ಕಾಗಿ ರಾಜ್ಯದ ಜನತೆ, ಸಮಾಜ, ಸರ್ಕಾರ ಅವರವರ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತಿದ್ದೇವೆ. ಶಾಲಾ- ಕಾಲೇಜುಗಳಲ್ಲಿ ಶಾಂತಿ ಮೂಡಬೇಕು. ಮೊದಲಿನಂತೆಯೇ ವಿದ್ಯಾರ್ಜನೆಯಾಗಬೇಕು. ಮಾರ್ಚ್ನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಮಕ್ಕಳಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂದು ನಾವೆಲ್ಲರೂ ಸೇರಿ ಪ್ರಯತ್ನ ಮಾಡುತ್ತಿದ್ದೇವೆ. ಇದಕ್ಕೆ ವಿರೋಧಪಕ್ಷಗಳು ಸಹಕರಿಸಬೇಕು’ ಎಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada