ಹುಬ್ಬಳ್ಳಿ, ಮಾರ್ಚ್, 10: ಪ್ರತಿ ಬಾರಿ ಪ್ರಧಾನಿ ನರೇಂದ್ರ ಮೋದಿ ಬಂದಾಗ ರಾಜ್ಯದ ಮೂಲಭೂತ ಸೌಕರ್ಯಗಳಿಗೆ ಹಣ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಿಗೂ ಅತೀ ಹೆಚ್ಚು ಹಣ ಕೊಟ್ಟಿದ್ದಾರೆ. ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಅತೀ ಹೆಚ್ಚು ಹಣ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ.
ರೈಲ್ವೆ, ಬಂದರು ಇತ್ಯಾದಿಗೆ ಹಣ ಕೊಟ್ಟಿದ್ದಾರೆ. ಹೀಗಾಗಿ ಮೋದಿ ರಾಜ್ಯಕ್ಕೆ ಬಂದಾಗಲೆಲ್ಲಾ ಭೂಮಿ ಪೂಜೆ ಅಥವಾ ಲೋಕಾರ್ಪಣೆ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ತಮ್ಮ ನಿವಾಸದ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾಳೆ ನರೇಂದ್ರ ಮೋದಿ ಬಂದಾಗ ಐಐಟಿ ಉದ್ಘಾಟನೆ, ಜಯದೇವ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಐಐಟಿಗೆ ಹಂತ-ಹಂತವಾಗಿ ಹಣ ಕೊಡುತ್ತೇವೆ. ಇದೊಂದು ಪ್ರತಿಷ್ಠಿತ ಸಂಸ್ಥೆಯನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
12 ಯೋಜನೆಗಳಿಗೆ ಅನುಮೋದನೆ
ಸಾಗರ ಮಾಲಾ ಯೋಜನೆಯಡಿ ಬೇಲಿಕೇರಿ ಬಂದರು ಸೇರಿ 12 ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತದೆ. ರಾಜ್ಯ ಸರ್ಕಾರದಿಂದ ಎರಡು ಯೋಜನೆಗಳನ್ನು ಪಿಪಿಇ ಮೋಡ್ನಲ್ಲಿ ತೆಗೆದುಕೊಳ್ಳಲಾಗುತ್ತದೆ. ಹಾಗೆಯೇ ಜನಾರ್ಧನರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿ ಬಿಜೆಪಿಯೊಂದಿಗೆ ಇದ್ದರು. ಅವರು ಸದ್ಯ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ, ಆಮೇಲೆ ನೋಡೋಣ ಎಂದರು.
ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಸಿಎಂ ಹೇಳಿದ್ದೇನು?
ಇನ್ನು ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಇವತ್ತು ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಇದೆಲ್ಲ ಮಾಮೂಲಿಯಾಗಿರುತ್ತದೆ. ಈ ಕಡೆಯಿಂದ ಆಕಡೆ, ಆಕಡೆಯಿಂದ ಈಕಡೆ ಬರುವುದು ಸಾಮಾನ್ಯವಾಗಿರುತ್ತದೆ. ಚುನಾವಣೆಯಲ್ಲಿ ಮೂರನೇ ಹಂತದ ಪ್ರಚಾರವನ್ನು ನಡೆಸಿದ್ದೇವೆ. ಈಗ ವಿಜಯ ಸಂಕಲ್ಪ ಯಾತ್ರೆಯನ್ನು ಮಾಡುತ್ತಿದ್ದೇವೆ. 224 ಕ್ಷೇತ್ರಗಳಲ್ಲಿಯೂ ಒಂದಲ್ಲ ಒಂದು ಚಟುವಟಿಕೆ ಮಾಡುತ್ತಿದ್ದೇವೆ ಎಂದರು.
ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಟೆಂಡರ್ ಕರೆಯಲು ಅಂತಿಮ ಯತ್ನಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನಾನು, ಯಡಿಯೂರಪ್ಪ ಅಭಿವೃದ್ಧಿ ಕಾರ್ಯಗಳಿಂದಾಗಿ ಬಿಜೆಪಿಗೆ ದೊಡ್ಡ ಬೆಂಬಲ ಸಿಗುತ್ತಿದೆ. ಕಳೆದ ಒಂದೂವರೆ ತಿಂಗಳಿನಲ್ಲಿ ಬೆಂಬಲದ ಪ್ರಮಾಣ ಹೆಚ್ಚುತ್ತಿದೆ. ಇದನ್ನು ನೋಡಿದಾಗ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸ ಹೆಚ್ಚುತ್ತಿದೆ ಎಂದರು.
ಕಾಂಗ್ರೆಸ್ಗೆ 65 ಸ್ಥಾನ ಅಷ್ಟೇ ಬರುತ್ತದೆ
ಬಿಜೆಪಿಗೆ 65 ಸ್ಥಾನ ಬರುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ ಕಾಂಗ್ರೆಸ್ಗೆ 65 ಸೀಟು ಬರುತ್ತಿರಬಹುದು. ಬಿಜೆಪಿಯ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿಕ್ಕಿಲ್ಲ. ಬೇರೆ ಬೇರೆ ಮಾನದಂಡಗಳನ್ನು ಅನುಸರಿಸಲಾಗುತ್ತದೆ. ಸಮೀಕ್ಷೆ, ರಾಜಕೀಯ ಎದುರಾಳಿ ಇತ್ಯಾದಿಗಳನ್ನು ಗಮನಿಸಿ ಟಿಕೆಟ್ ಕೊಡಲಾಗುತ್ತದೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada