ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಠ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳೆಯದಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ 1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023ರನ್ನು ಬಂಡವಾಳದಾರರ ಪರವಾಗಿ ರಾಜ್ಯ ಬಿಜೆಪಿ ಸರ್ಕಾರವು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಿರುವುದು ಕಾರ್ಮಿಕರ ವಿರೋಧಿ ನೀತಿ ಎಂದು ಆರೋಪಿಸಿ ಬುಧವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಕಾರ್ಯಕರ್ತರು ವಿಧೇಯಕದ ಪ್ರತಿ ದಹಿಸಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, 1948ರ ಕಾಯ್ದೆಯ ದಿನದ ಕೆಲಸದ ಅವಧಿಯು ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕೆಂದು ಹೇಳುತ್ತದೆ. ಆದಾಗ್ಯೂ, ತಿದ್ದುಪಡಿಯ ವಿಧೇಯಕದಲ್ಲಿ ಯಾವುದೇ ವಿರಾಮವಿಲ್ಲದೇ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಿ ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.ಉದ್ಯೋಗ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಈ ಅವಧಿಯಲ್ಲಿ ಹೆಚ್ಚಾಗುತ್ತದೆ. ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೇ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಕಾರ್ಮಿಕರ ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆ ಮಾಲಿಕರಿಗೆ ಆರು ದಿನಗಳ ಉತ್ಪಾದನೆಯನ್ನು ನಾಲ್ಕು ದಿನಗಳಲ್ಲಿಯೇ ಉತ್ಪಾದನೆ ಮಾಡಿಕೊಳ್ಳಲು ಕಾಯ್ದೆಯಲ್ಲಿ ಅವಕಾಶ ಸಿಗಲಿದೆ. ಇದು ಕಾರ್ಮಿಕರ ಶ್ರಮದ ಅತೀವ ಶೋಷಣೆಯಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.ಮೂರು ಪಾಳಿಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟಿನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ದಾರಿ ಮಾಡಿಕೊಡಲಿದೆ ಎಂದು ದೂರಿದ ಅವರು, ಕೂಡಲೇ ಕಾರ್ಮಿಕ ವಿರೋಧಿ ವಿಧೇಯಕವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷೆ ಶಾಂತಾ ಘಂಟೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂ.ಬಿ. ಸಜ್ಜನ್, ನಾಗಯ್ಯಸ್ವಾಮಿ, ಗೌರಮ್ಮ ಪಾಟೀಲ್, ಶ್ರೀಮಂತ್ ಬಿರಾದಾರ್ ಹಾಗೂ ಬಾಬು ಹೂವಿನಹಳ್ಳಿ ಮುಂತಾದವರು ಪಾಲ್ಗೊಂಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada